ಹಜ್ ಯಾತ್ರಿಕರಿಗೆ ಮತ್ತೆ ಪ್ರತ್ಯೇಕ ಟರ್ಮಿನಲ್ ಆರಂಭಿಸುವ ನಿರೀಕ್ಷೆಯಿದೆ: ಹಜ್ ಸಚಿವ ರಹೀಂ ಖಾನ್

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಹಜ್ ಯಾತ್ರಿಕರಿಗೆ ಮತ್ತೆ ಪ್ರತ್ಯೇಕ ಟರ್ಮಿನಲ್ ಆರಂಭಿಸುವ ನಿರೀಕ್ಷೆಯಿದೆ ಎಂದು ಹಜ್ ಸಚಿವ ರಹೀಂ ಖಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಿಂದ ಹೊರಡುವ ಹಜ್ ಯಾತ್ರಿಕರಿಗೆ ಬಿಐಎಲ್ನಿಂದ ಪ್ರತಿ ವರ್ಷ ಪ್ರತ್ಯೇಕ ತಾತ್ಕಾಲಿಕ ಟರ್ಮಿನಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಅದೇ ರೀತಿ ಮಂಗಳೂರು ವಿಮಾನ ನಿಲ್ದಾಣದಿಂದ ಪ್ರತ್ಯೇಕ ಟರ್ಮಿನಲ್ಗೆ ಎರಡು ವರ್ಷಗಳಿಂದ ಕೇಂದ್ರ ಅನುಮತಿ ನೀಡಿರಲಿಲ್ಲ. ಮತ್ತೆ ಅನುಮತಿ ನೀಡುವ ಕುರಿತು ಕೇಂದ್ರ ಸಚಿವರನ್ನ ಭೇಟಿ ಮಾಡಿ ಮನವಿ ಮಾಡಲಾಗಿದ್ದು, ಈ ವರ್ಷ ಆರಂಭಿಸುವ ವಿಶ್ವಾಸವಿದೆ ಎಂದರು.
ರಾಜ್ಯದಲ್ಲಿ ಪ್ರತಿ ವರ್ಷ ಸಾವಿರಾರು ಮಂದಿ ಹಜ್ ಯಾತ್ರೆ ಕೈಗೊಳ್ಳುತ್ತಿದ್ದಾರೆ. 2025ರಲ್ಲಿ 8 ಸಾವಿರ ಹಾಗೂ ಈ ಬಾರಿ 11 ಸಾವಿರ ಮಂದಿ ಹಜ್ ಯಾತ್ರೆ ತೆರಳಲು ಆಯ್ಕೆಯಾಗಿದ್ದಾರೆ. ಸೌದಿ ಅರೇಬಿಯಾ ದೇಶದ ಮಾನದಂಡದಂತೆ ಹಜ್ ಯಾತ್ರಿಕರ ಆರೋಗ್ಯ ತಪಾಸಣೆಯಲ್ಲಿ ದೃಢವಾಗಿರುವುದನ್ನ ಖಚಿತಪಡಿಸಿಕೊಳ್ಳಲಾಗುವುದು. ಹಜ್ ಸಮಿತಿಯಿಂದ ಜಿಲ್ಲಾ ಹಾಗೂ ವಲಯವಾರು ಮಟ್ಟದಲ್ಲಿ ತರಬೇತಿ ಶಿಬಿರ ನಡೆಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಎಂ. ನಾಗರಾಜ್ ಅವರ ಪ್ರಶ್ನೆಗೆ ಸಚಿವರು ಮಾಹಿತಿ ನೀಡಿದರು.
ಪಾರಂಪರಿಕ ಕಟ್ಟಡದ ಸುತ್ತ ವಾಣಿಜ್ಯ ಚಟುವಟಿಕೆ ಇಲ್ಲ ; ಬೈರತಿ ಸುರೇಶ್ : ರಾಜ್ಯದ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಪಾರಂಪರಿಕ ಕಟ್ಟಡಗಳ 100 ಮೀಟರ್ ಸುತ್ತಮುತ್ತ ಯಾವುದೇ ವಾಣಿಜ್ಯ ಚಟುವಟಿಕೆಗಳು ಮತ್ತು ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಸದಸ್ಯ ಕೆ. ಶಿವಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲಾ ಮಟ್ಟದಲ್ಲಿ ಪಾರಂಪರಿಕ ತಾಣಗಳ ಸಂರಕ್ಷಣಾ ಸಮಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಕಾಲಕಾಲಕ್ಕೆ ಸಭೆ ಸೇರಿ ಅವಲೋಕನ ಮಾಡುತ್ತಿವೆ. ಈ ಸಮಿತಿಗಳು ನೀಡುವ ಶಿಫಾರಸುಗಳ ಆಧಾರದಲ್ಲಿ ಪಾರಂಪರಿಕ ಕಟ್ಟಡಗಳ ಸುತ್ತಮುತ್ತಲಿನ ಚಟುವಟಿಕೆಗಳಿಗೆ ಅನುಮತಿ ನೀಡುವುದು ಅಥವಾ ನಿಯಂತ್ರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಲ್ಯಾನ್ಸ್ ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆಗಳು, ವಾಣಿವಿಲಾಸ ಮಾರುಕಟ್ಟೆ ಮತ್ತು ಮಂಡಿ ಮೊಹಲ್ಲಾ ಮಾರುಕಟ್ಟೆಗಳು ಶಿಥಿಲಾವಸ್ಥೆಯಲ್ಲಿರುವುದನ್ನು ಸರ್ಕಾರ ಗಮನಿಸಿದೆ. ಈ ಹಿನ್ನೆಲೆಯಲ್ಲಿ ಲ್ಯಾನ್ಸ್ ಡೌನ್ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣ ಮಾಡಲು ಸರ್ಕಾರ ಯೋಜನಾ ವರದಿ ಸಿದ್ಧಪಡಿಸಿತ್ತು. ಆದರೆ, ಇದಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನೀಡುವ ಆದೇಶದ ನಂತರ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿಗಳ ಬಳಿ ಹಣ : ಪಾರಂಪರಿಕ ಕಟ್ಟಡಗಳ ದುರಸ್ತಿ ಕಾರ್ಯಗಳಿಗಾಗಿ ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಹಣವಿದೆ. ಅಗತ್ಯ ಬಿದ್ದಾಗ ಬಳಸಿಕೊಳ್ಳಲು ಅವರಿಗೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದ ಸಚಿವ ಬೈರತಿ ಸುರೇಶ್ ಅವರು, ಪಾರಂಪರಿಕ ಕಟ್ಟಡಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದರು.



